ಸಿ.ಪಿ.ಯೋಗೇಶ್ವರ್ ರಾಜೀನಾಮೆ: ಸ್ವತಂತ್ರ ಸ್ಪರ್ಧೆ ಇಂಗಿತ
ಬೆಂಗಳೂರು: ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಪಿ.ಯೋಗೇಶ್ವರ್ ರಾಜೀನಾಮೆ ನೀಡಿದ್ದಾರೆ.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಹುಬ್ಬಳ್ಳಿಯಲ್ಲಿ ಇದ್ದುದರಿಂದ ಯೋಗೇಶ್ವರ್ ಹುಬ್ಬಳ್ಳಿಗೆ ಹೋಗಿ ರಾಜೀನಾಮೆ ಸಲ್ಲಿಸಿದ್ದಾರೆ.
ಅದಕ್ಕೂ ಮೊದಲು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಪಿವೈ,ಜೆಡಿಎಸ್ನಿಂದ ಸ್ಪರ್ಧಿಸಿದರೆ ಕಷ್ಟ ಆಗಲಿದೆ ಬಿಜೆಪಿಯಿಂದಲೇ ನಿಲ್ಲಬೇಕೆಂಬ ಆಸೆ ಇದೆ, ಟಿಕೆಟ್ ಸಿಗದಿದ್ದರೆ ಸ್ವತಂತ್ರವಾಗಿ ಸ್ಪರ್ಧಿಸುವ ಇಚ್ಚೆ ಎಂದು ತಿಳಿಸಿದರು.
ಕುಮಾರಸ್ವಾಮಿಯವರ ಮನಸ್ಸಿನಲ್ಲಿ ಅವರ ಮಗನಿಗೆ ಅಥವಾ ತಮ್ಮ ಕುಟುಂಬದವರಿಗೆ ಟಿಕೆಟ್ ಕೊಡಬೇಕು ಎಂಬ ಆಸೆ ಇದೆ. ಅವರ ಮನಸಲ್ಲೇ ಆ ತರಹ ಇದ್ದರೆ ನಾನು ಏನು ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು.
ಜೆಡಿಎಸ್ ಚಿನ್ಹೆಯಲ್ಲಿ ನಿಲ್ಲಿ ಎಂದು ಅವರು ಮುಕ್ತವಾಗೇನೂ ಹೇಳಿಲ್ಲ, ಅವರ ಪಕ್ಷದ ಮುಖಂಡರು ಬಂದಾಗ ಹೇಳಿದ್ದರು ಅಷ್ಟೇ. ನಾನು ನನ್ನ ತಾಲೂಕಿನ ಜನರ ಜೊತೆಗೂ ಇದರ ಬಗ್ಗೆ ಚರ್ಚೆ ಮಾಡಿದ್ದೇನೆ,ಬಹಳ ಭಿನ್ನಾಭಿಪ್ರಾಯ ಬಂದಿದೆ ಎಂದು ತಿಳಿಸಿದರು.
ಇಷ್ಟು ವರ್ಷ ವಿರೋಧ ಮಾಡಿಕೊಂಡು ಬಂದಿದ್ದೀರಿ, ಈಗ ಮೈತ್ರಿ ಆಗಿದೆ. ಈಗ ಅನಾವಶ್ಯಕವಾಗಿ ಜೆಡಿಎಸ್ಗೆ ಹೋಗುವುದು ಬೇಡ ಅಂತ ತಾಲೂಕಿನಲ್ಲಿ ಅಭಿಪ್ರಾಯ ಬಂದಿದೆ, ನಾನು ಬಿಜೆಪಿಯಿಂದಲೇ ನಿಲ್ಲಲು ನಿರ್ಧರಿದ್ದೇನೆ. ಆದರೆ ನನಗೆ ಯಾರೂ ಬೆಂಬಲ ಕೊಡುತ್ತಿಲ್ಲ ಎಂದು ಯೋಗೇಶ್ವರ್ ತೀವ್ರ ಬೇಸರ ವ್ಯಕ್ತಪಡಿಸಿದರು.